ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸಿಂಧನೂರು ವತಿಯಿಂದ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ಅಡಿಯಲ್ಲಿ ಕನ್ನಡ ವಿಭಾಗ ಹಾಗೂ ಇತಿಹಾಸ ವಿಭಾಗಗಳ ಸಹಯೋಗದಲ್ಲಿ “ಕರ್ನಾಟಕದಲ್ಲಿ ಜೈನ ಧರ್ಮ, ಸಾಹಿತ್ಯ ಮತ್ತು ಸಂಸ್ಕೃತಿ” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಜನವರಿ 31, 2026 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಶ್ರೀ ಹಂಪನಗೌಡ ಬಾದರ್ಲಿ, ಮಾನ್ಯ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಉದ್ಘಾಟಿಸಲಿದ್ದು, ಶ್ರೀ ಬಸವನಗೌಡ ಬಾದರ್ಲಿ, ಮಾನ್ಯ ವಿಧಾನ ಪರಿಷತ್ ಸದಸ್ಯರು, ಸಿಂಧನೂರು ಇವರಿಂದ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸಿಂಧನೂರು ಪ್ರಾಂಶುಪಾಲರಾದ ಶ್ರೀ ಮಹಾಂತಪ್ಪ ಕೊಡಗಲಿ ವಹಿಸಲಿದ್ದಾರೆ.

ಈ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ರಾಜ್ಯ ಹಾಗೂ ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ ಆಗಮಿಸುವ ಸಂಶೋಧನಾರ್ಥಿಗಳು, ಪ್ರಾಧ್ಯಾಪಕರು, ಚಿಂತಕರು, ಸಾಹಿತಿಗಳು, ಜೈನ ಧರ್ಮ ಅಧ್ಯಯನಕಾರರು ಸೇರಿದಂತೆ ಹಲವಾರು ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜೈನ ಧರ್ಮದ ತತ್ತ್ವಚಿಂತನೆ, ಕನ್ನಡ ಸಾಹಿತ್ಯಕ್ಕೆ ಅದರ ಕೊಡುಗೆ, ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸಾತ್ಮಕ ಮಹತ್ವದ ಕುರಿತು ವಿಚಾರ ಮಂಡನೆಗಳು ನಡೆಯಲಿವೆ.

ಕಾರ್ಯಕ್ರಮವು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಮಹತ್ವದ ವೇದಿಕೆಯಾಗಲಿದ್ದು, ವಿದ್ಯಾರ್ಥಿನಿಯರಿಗೆ ಹಾಗೂ ಅಧ್ಯಯನಾಸಕ್ತರಿಗೆ ಜ್ಞಾನಾರ್ಜನೆಗೆ ಸಹಕಾರಿಯಾಗಲಿದೆ ಎಂದು ಕಾಲೇಜ ಅಬಿರುದ್ದಿ ಸಮಿತಿ ತಿಳಿಸಿದೆ.
ಈ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಹಾಂತಪ್ಪ ಕೊಡಗಲಿ ಅವರು ದೂರವಾಣಿ ಮೂಲಕ ಮನವಿ ಮಾಡಿದ್ದಾರೆ.













