ಸಿಂಧನೂರು, ಜು.15: ತಾಲೂಕಿನ ತುರುವಿಹಾಳ ಹೋಬಳಿಯ ಉಮಲೂಟಿ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಮರಂ (ಮುರಂ) ಕ್ವಾರಿಯಲ್ಲಿ ಈಜಲು ಹೋಗಿದ್ದ ಯುವ ವಕೀಲರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಹನೀಫ್ (32), ತಂದೆ ಬೀರ ಮಲ್ಲಪ್ಪ, ಉಮಲೂಟಿ ನಿವಾಸಿ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವಕೀಲರಾಗಿದ್ದ ಹನೀಫ್ ಅವರಿಗೆ ಬಿಡುವಿನ ವೇಳೆಯಲ್ಲಿ ಕುರಿ ಮೇಯಿಸುವ ಹವ್ಯಾಸವಿದ್ದು, ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆಗೆ ಪ್ರತಿದಿನದಂತೆ ಕುರಿಗಳನ್ನು ಮೇಯಿಸಲು ಗ್ರಾಮದ ಹೊರವಲಯಕ್ಕೆ ತೆರಳಿದ್ದರು.

ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಉಮಲೂಟಿ ಹೊಸ ಕೆರೆಯ ಹಿಂಭಾಗದಲ್ಲಿರುವ ಸುಮಾರು 40 ಅಡಿ ಆಳದ ನೀರು ತುಂಬಿದ್ದ ಅಕ್ರಮ ಮರಂ ಕ್ವಾರಿಗೆ ಈಜಲು ಇಳಿದಿದ್ದಾರೆ. ಆದರೆ ನೀರಿನ ಆಳ ಮತ್ತು ಪರಿಸ್ಥಿತಿಯನ್ನು ಅಂದಾಜಿಸಲು ಸಾಧ್ಯವಾಗದೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಶೋಧ ನಡೆಸಿ, ಮೃತದೇಹವನ್ನು ಹೊರತೆಗೆದರು. ಬಳಿಕ ತುರುವಿಹಾಳ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಕ್ವಾರಿ ವಿರುದ್ಧ ಗಂಭೀರ ಆರೋಪ
ಮೃತರ ಸಂಬಂಧಿಕರು, ಉಮಲೂಟಿ ಹೊಸ ಕೆರೆಯ ಹಿಂಭಾಗದಲ್ಲಿ ಪರಶುರಾಮ್ ಎಂಬುವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಮರಂ ಕ್ವಾರಿ ನಡೆಸಿರುವುದಲ್ಲದೆ, ಪಕ್ಕದ ಜಮೀನಿನಲ್ಲಿಯೂ ಅಕ್ರಮವಾಗಿ ಮರಂ ಕ್ವಾರಿ ಮಾಡಿರುವ ಆರೋಪ ಮಾಡಿದ್ದಾರೆ. ಅಲ್ಲದೆ, ಪರಶುರಾಮ್ ವಿರುದ್ಧ ಈ ಹಿಂದೆಯೂ ಅಕ್ರಮ ಚಟುವಟಿಕೆಗಳು ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿಬಂದಿದ್ದರೂ, ಸಂಬಂಧಪಟ್ಟ ಇಲಾಖೆಗಳಿಂದ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯವೇ ಜೀವ ಬಲಿ?
ಸುಮಾರು 40 ಅಡಿ ಆಳದ ಅಕ್ರಮ ಕ್ವಾರಿಯಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ನೀರು ಸಂಗ್ರಹವಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಇಂತಹ ಅಪಾಯಕಾರಿ ಅಕ್ರಮ ಕ್ವಾರಿಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸೂಕ್ತ ಕ್ರಮ ಕೈಗೊಂಡಿದ್ದರೆ ಈ ದುರಂತ ತಪ್ಪಿಸಬಹುದಾಗಿತ್ತು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಮರಂ ಕ್ವಾರಿಗಳನ್ನು ಕೂಡಲೇ ಮುಚ್ಚಿಸಿ, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.













