ಎಲ್ಲ ಅಧಿಕಾರಿಗಳೂ ಮಾನವ ಹಕ್ಕುಗಳ ಸಂರಕ್ಷಣಾಧಿಕಾರಿಗಳು: ಡಾ. ಟಿ. ಶ್ಯಾಮ್ ಭಟ್
ರಾಯಚೂರು, ಮಾರ್ಚ್ 26: ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮಾನವ ಹಕ್ಕುಗಳ ಸಂರಕ್ಷಣಾಧಿಕಾರಿಗಳಾಗಿದ್ದು, ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಹಾಗೂ ಮಾನವೀಯತೆಯಿಂದ ವರ್ತಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಕರಣಗಳ ವಿಲೇವಾರಿ, ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ದೂರುಗಳ ವಿಚಾರಣೆಯಲ್ಲಿ ಅಧಿಕಾರಿಗಳು ಜವಾಬ್ದಾರಿತನದಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.
ಮಾರ್ಚ್ 25ರಂದು ರಾಯಚೂರು ನಗರದಲ್ಲಿ ವಸತಿ ನಿಲಯಗಳು, ಬಸ್ ನಿಲ್ದಾಣ, ಕಾರಾಗೃಹ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಲಾಗಿದ್ದು, ಅಲ್ಲಿ ಇರುವ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಕೆಲವು ವಸತಿ ನಿಲಯಗಳಲ್ಲಿ ವಿದ್ಯಾರ್ಥಿನಿಯರು ಇಕ್ಕಟ್ಟಾದ ಕೋಣೆಯಲ್ಲಿ ವಾಸಿಸುತ್ತಿರುವುದು ಗಮನಕ್ಕೆ ಬಂದಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ಅಶುಚಿತ್ವ ಕಂಡು ಬಂದಿದ್ದು, ಅದನ್ನು ತಕ್ಷಣ ಸರಿಪಡಿಸಬೇಕೆಂದು ಸೂಚಿಸಿದರು. ರಾಯಚೂರು–ಮಾನವಿ ಮತ್ತು ರಾಯಚೂರು–ಲಿಂಗಸೂರು ಮಾರ್ಗಗಳಲ್ಲಿ ಬಸ್ ಸೇವೆಯನ್ನು ಹೆಚ್ಚಿಸಬೇಕೆಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಲು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದರು. ಬಸ್ ನಿಲ್ದಾಣದ ಅಂಗಡಿಗಳಲ್ಲಿ ಹೆಚ್ಚು ಬೆಲೆ ವಸೂಲಿ ಮಾಡುವುದು ಹಾಗೂ ಅವಧಿ ಮೀರಿದ ಆಹಾರ ವಸ್ತುಗಳ ಮಾರಾಟವನ್ನು ತಡೆಯುವಂತೆ ಕೂಡ ಸೂಚಿಸಿದರು.

ಈ ಸಂದರ್ಭದಲ್ಲಿ ಆಯೋಗದ ನ್ಯಾಯಿಕ ಸದಸ್ಯರಾದ ಎಸ್. ಕೆ. ವಂಟಿಗೋಡಿ ಮಾತನಾಡಿ, ಮಾನವ ಹಕ್ಕುಗಳು ವ್ಯಕ್ತಿಗೆ ಜನ್ಮತಃ ದೊರೆಯುವ ಮೂಲಭೂತ ಹಕ್ಕುಗಳಾಗಿದ್ದು, ಪ್ರತಿಯೊಬ್ಬರೂ ಸಮಾನ ಅವಕಾಶಗಳೊಂದಿಗೆ ಬದುಕುವ ಹಕ್ಕು ಹೊಂದಿದ್ದಾರೆ ಎಂದು ತಿಳಿಸಿದರು.
ಯಾರೂ ಸಹ ಶೋಷಣೆಗೆ ಒಳಗಾಗಬಾರದು, ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ವಸತಿ, ಆಹಾರ, ಶುದ್ಧ ನೀರು, ಉದ್ಯೋಗ ಹಾಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕುಗಳನ್ನು ಸಂವಿಧಾನ ಒದಗಿಸಿದೆ. ಸಾರ್ವಜನಿಕರ ಮನವಿಗಳಿಗೆ ಸ್ಪಂದನೆ ನೀಡದಿರುವುದು, ಅಥವಾ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾದರೆ ಅದು ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಎಚ್ಚರಿಸಿದರು.
ಯಾವುದೇ ಪ್ರಕರಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಶು ಗಿರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.













