ಬಾಗಲಕೋಟೆ, ಮೇ 4: BB NEWS KANNADA
ಪ್ರತಿಷ್ಠಿತವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ರಾಜಕೀಯ ಜಯ ಲಭಿಸಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡ ಈ ಉಪಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು, ಶಾಸಕರು ಮತ್ತು ಸಂಸದರು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದರು. ಭರ್ಜರಿ ಕ್ಯಾಂಪೇನ್ಗೆ ಸಾರ್ಥಕವಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ.
ಮತ ಎಣಿಕೆ ಪ್ರಕ್ರಿಯೆಯಲ್ಲಿ 20ನೇ ಸುತ್ತಿನ ಅಂತ್ಯದ ವೇಳೆಗೆ ಉಮೇಶ್ ಮೇಟಿ ಅವರು ಸುಮಾರು 16,471 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದರು. ಇನ್ನೂ ಕೇವಲ ಮೂರು ಸುತ್ತುಗಳ ಮತ ಎಣಿಕೆ ಬಾಕಿ ಇದ್ದರೂ, ಉಳಿದ ಮತಗಳಿಗಿಂತ ಮುನ್ನಡೆ ಹೆಚ್ಚಿನದಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಗೆಲುವಿನ ಸಂಭ್ರಮಾಚರಣೆ ಆರಂಭಿಸಿದ್ದಾರೆ.
ಇನ್ನೊಂದೆಡೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸೋಲನುಭವಿಸಿದ್ದಾರೆ. ಈ ಸೋಲು ಬಿಜೆಪಿಗೆ ಹಿನ್ನಡೆಯಾಗಿ ಪರಿಣಮಿಸಿದೆ.
ಚುನಾವಣಾ ಫಲಿತಾಂಶ ಸ್ಪಷ್ಟವಾಗುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು. ಪ್ರತಿಷ್ಠೆಯ ಚುನಾವಣೆ ಆಗಿದ್ದರಿಂದ ಈ ಗೆಲುವು ವಿಶೇಷ ಮಹತ್ವ ಪಡೆದುಕೊಂಡಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಈ ಫಲಿತಾಂಶ ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಶುರುವಾಗಿದೆ.









