BB NEWS KANNADA
ವಿಜಯನಗರ: ವಿಜಯನಗರ–ದಾವಣಗೆರೆ ಗಡಿ ಭಾಗದ ಮುಸ್ಟೂರು–ಕಡಬನಕಟ್ಟೆ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಸಿಆರ್ಇ ಘಟಕದ ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮಾಹಿತಿಯಂತೆ, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಾಶವಾಗಿದ್ದು, ಸಿಪಿಐ ರಘುನಾಥ್ ಅವರಿಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ರಘುನಾಥ್ ಅವರು ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್ಇ ಘಟಕದಲ್ಲಿ ಸಿಪಿಐಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದ ಅವರು, ತಮ್ಮ ಸ್ವಗ್ರಾಮದಿಂದ ಹೊಸಪೇಟೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಅವರಿಗೆ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಯ ಆದೇಶ ಬಂದಿದ್ದರೂ, ಇನ್ನೂ ಹುದ್ದೆಗೆ ವರದಿ ಮಾಡಿಕೊಂಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಸುದ್ದಿ ತಿಳಿದ ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆ ಪೊಲೀಸ್ ವಲಯದಲ್ಲಿ ತೀವ್ರ ಸಂತಾಪಕ್ಕೆ ಕಾರಣವಾಗಿದ್ದು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ದುಃಖ ವ್ಯಕ್ತಪಡಿಸಿದ್ದಾರೆ.









