ರಾಯಚೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ
ರಾಯಚೂರು, ಮಾರ್ಚ್ 27: ರಾಯಚೂರು ಜಿಲ್ಲೆಯ 250 ಗ್ರಾಮಗಳಲ್ಲಿ ಬಾಲ್ಯ ವಿವಾಹಗಳನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮೂಹಿಕ ವಿವಾಹ ಸಂದರ್ಭಗಳಲ್ಲಿ ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿರುವುದರಿಂದ ವಿಶೇಷ ನಿಗಾವಹಿಸಬೇಕೆಂದು ಹೇಳಿದರು.
ಬಾಲ್ಯ ವಿವಾಹ ಒಂದು ಅನಿಷ್ಠ ಪದ್ಧತಿಯಾಗಿದ್ದು, ಜನರಲ್ಲಿ ಜಾಗೃತಿ ಕೊರತೆಯಿಂದ ಇದು ಮುಂದುವರಿಯುತ್ತಿದೆ. ಆದ್ದರಿಂದ ಜನತೆಗೆ ನಿರಂತರವಾಗಿ ಅರಿವು ಮೂಡಿಸುವುದು ಮತ್ತು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವುದು ಅಗತ್ಯವೆಂದು ಅವರು ಹೇಳಿದರು. ಈ ಸಂಬಂಧ ತಕ್ಷಣವೇ ಸಮಗ್ರ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದರು.
ರಾಯಚೂರು ಜಿಲ್ಲೆಯ ವಿವಿಧ ತಾಲೂಕುಗಳಾದ ಮಾನವಿ, ಸಿಂಧನೂರು, ಮಸ್ಕಿ, ಲಿಂಗಸೂರು, ಸಿರವಾರ, ಅರಕೇರಾ ಮತ್ತು ದೇವದುರ್ಗ ಪ್ರದೇಶಗಳಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಒಗ್ಗೂಡಿ ಕೆಲಸ ಮಾಡಬೇಕೆಂದು ಹೇಳಿದರು.
ಬಾಲ್ಯ ವಿವಾಹ ನಡೆಯುತ್ತಿರುವ ಮಾಹಿತಿ ದೊರೆತ ತಕ್ಷಣವೇ ಸ್ಥಳಕ್ಕೆ ತೆರಳಿ ಅದನ್ನು ತಡೆದು, ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಸಹಕರಿಸಿದವರ ಮೇಲೂ ಯಾವುದೇ ಮುಲಾಜಿಲ್ಲದೆ ಕ್ರಮ ವಹಿಸಲು ಆದೇಶಿಸಿದರು.

ಇದಲ್ಲದೆ, ಜಿಲ್ಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಗಳ ತಾಲೂಕುವಾರು ವರದಿ ಸಲ್ಲಿಸುವಂತೆ ಹಾಗೂ ಅವುಗಳ ಮೇಲೆ ಕೈಗೊಂಡ ಕ್ರಮಗಳ ವಿವರ ನೀಡುವಂತೆ ಸೂಚಿಸಿದರು. ಬಾಲ ಗರ್ಭಿಣಿಯರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆರೋಗ್ಯ ಇಲಾಖೆ ತಿಂಗಳುವಾರು ದತ್ತಾಂಶ ಒದಗಿಸಬೇಕೆಂದು ತಿಳಿಸಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ತಡೆಗೆ ಪ್ರತಿಯೊಂದು ತಾಲೂಕಿನಲ್ಲಿ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ, ಬಾಲ್ಯ ವಿವಾಹ ಅಪರಾಧವೆಂದು ಜನತೆಗೆ ತಿಳಿಸುವುದು ಅಗತ್ಯವೆಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ಕುಮಾರ್ ಅವರು ಮಾಹಿತಿ ನೀಡಿದ್ದು, ಪೋಷಣ್ ಅಭಿಯಾನ ಯೋಜನೆಯಡಿ 2,27,515 ಫಲಾನುಭವಿಗಳು ನೋಂದಣಿಯಾಗಿದ್ದು, ಬಹುತೇಕ ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ ಎಂದರು. ಜಿಲ್ಲೆಯಲ್ಲಿ 2856 ಅಂಗನವಾಡಿಗಳಲ್ಲಿ 1940 ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.












