📍ಸಿಂಧನೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಸರ್ಕಾರದ ಆದೇಶದಂತೆ ಕರ್ತವ್ಯದ ವೇಳೆ ಸಿಬ್ಬಂದಿಗಳು ಸಮವಸ್ತ್ರ ಧರಿಸಿ, ಗುರುತಿನ ಚೀಟಿ (ID Card) ಕಡ್ಡಾಯವಾಗಿ ಧರಿಸಬೇಕು. ಆದರೆ ತಾಲೂಕಿನ ಹಲವಾರು ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿದ ಸಾರ್ವಜನಿಕರಿಗೆ ಯಾರು ಅಧಿಕಾರಿಗಳು, ಯಾರು ಸಿಬ್ಬಂದಿಗಳು ಎಂಬುದು ಗುರುತಿಸಲು ಕಷ್ಟವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ.


ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಖಡಕ್ ಖಾದಿ, ಲೆನಿನ್ ಶರ್ಟ್ ಹಾಗೂ ಪ್ಯಾಂಟ್ ಧರಿಸಿ ಗುರುತಿನ ಚೀಟಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಸಾಮಾನ್ಯ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಸಾರ್ವಜನಿಕರು ಕೆಲಸಕ್ಕಾಗಿ ಕಚೇರಿಗಳಿಗೆ ಹೋದಾಗ ಅಧಿಕಾರಿಗಳನ್ನು ಗುರುತಿಸಲು ಸಾಧ್ಯವಾಗದೆ ಹಿಂತಿರುಗುವ ಪರಿಸ್ಥಿತಿಯೂ ಉಂಟಾಗುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.“ಸರ್ಕಾರದ ಆದೇಶಗಳಿಗೆ ಬೆಲೆ ಇಲ್ಲವೇ? ಸಮವಸ್ತ್ರ ಹಾಗೂ ಗುರುತಿನ ಚೀಟಿ ಕಡ್ಡಾಯ ಎಂಬ ನಿಯಮ ಕೇವಲ ಕಾಗದದಲ್ಲೇ ಉಳಿದಿದೆಯೇ?” ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್., IAS ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಈಶ್ವರ್ ಕುಮಾರ್ ಕಂಡೂ, IAS ಅವರು ಸಿಂಧನೂರು ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಿಗೆ ಅಚ್ಚರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಸಾರ್ವಜನಿಕರಿಗೆ ಸುಲಭ ಗುರುತು ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಇದೇ ರೀತಿಯ ಅನುಭವಗಳು ನಿಮಗೂ ಆಗಿದ್ದರೆ ಯಾವ ಇಲಾಖೆ, ಯಾವ ಕಚೇರಿಯಲ್ಲಿ ಎಂಬುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.












