ಅಮರಾವತಿ/ಸಿಂಧನೂರು, ಜೂನ್ 22: ಮುನಿರಾಬಾದ್ನಲ್ಲಿ ಜೂನ್ 25ರಂದು ನಡೆಯಲಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ಗಳ ಉದ್ಘಾಟನಾ ಸಮಾರಂಭಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಕರ್ನಾಟಕದ ಶಾಸಕರ ನಿಯೋಗವು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸಿತು.

ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಶಾಸಕರಾದ ಎನ್.ಎಸ್. ಬೋಸರಾಜು, ಬಸವರಾಜ ರಾಯರೆಡ್ಡಿ ಹಾಗೂ ಬಸನಗೌಡ ಬಾದರ್ಲಿ ಅವರ ನೇತೃತ್ವದ ನಿಯೋಗವು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಆಹ್ವಾನ ಪತ್ರ ನೀಡಿತು.

ಈ ಸಂದರ್ಭದಲ್ಲಿ ತುಂಗಭದ್ರಾ ಅಣೆಕಟ್ಟಿನ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಳವಡಿಸಲಾಗಿರುವ ನೂತನ ಕ್ರಸ್ಟ್ ಗೇಟ್ಗಳ ಉದ್ಘಾಟನಾ ಸಮಾರಂಭದ ಮಹತ್ವವನ್ನು ನಿಯೋಗವು ವಿವರಿಸಿತು. ಆಹ್ವಾನ ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜೂನ್ 25ರಂದು ಮುನಿರಾಬಾದ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಒಪ್ಪಿಗೆ ನೀಡಿದರು. ತುಂಗಭದ್ರಾ ಯೋಜನೆಯ ಪ್ರಮುಖ ಫಲಾನುಭವಿಗಳಲ್ಲಿ ಆಂಧ್ರಪ್ರದೇಶವೂ ಒಂದಾಗಿರುವ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರ ಉಪಸ್ಥಿತಿಯು ಸಮಾರಂಭಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ನಿಯೋಗದ ಸದಸ್ಯರು ತಿಳಿಸಿದರು.

ಈ ವೇಳೆ ಆಂಧ್ರಪ್ರದೇಶ ಸರ್ಕಾರದ ಸಚಿವರಾದ ರಾಮ್ ಮೋಹನ್ ನಾಯ್ಡು ಹಾಗೂ ಪಿ. ಕೇಶವ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ಜೂನ್ 25ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ವಿವಿಧ ರಾಜ್ಯಗಳ ಗಣ್ಯರು ಭಾಗವಹಿಸುವ ನಿರೀಕ್ಷೆ ಇದ್ದು, ತುಂಗಭದ್ರಾ ಜಲಾಶಯದ ನೂತನ ಗೇಟ್ಗಳ ಉದ್ಘಾಟನೆ ಐತಿಹಾಸಿಕ ಕ್ಷಣವಾಗಲಿದೆ ಎಂದು ಮೂಲಗಳು ತಿಳಿಸಿವೆ.













