ರಾಯಚೂರು, ಜೂನ್ 16: ಅಪಘಾತಗಳು ಹಾಗೂ ವಿವಿಧ ಕಾಯಿಲೆಗಳಿಂದ ಪ್ರಾಣಾಪಾಯದಲ್ಲಿರುವವರ ಜೀವ ಉಳಿಸುವಲ್ಲಿ ರಕ್ತದಾನ ಮಹತ್ತರ ಪಾತ್ರ ವಹಿಸುತ್ತಿದ್ದು, ಸಮಾಜದ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ಲಯನ್ಸ್ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ಸಿಸಿ, ಜಿಲ್ಲೆಯ ವಿವಿಧ ರಕ್ತ ಕೇಂದ್ರಗಳು ಹಾಗೂ ಹಲವು ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಸೂಕ್ತ ರಕ್ತದ ಕೊರತೆಯಿಂದ ಅನೇಕ ರೋಗಿಗಳು ಹಾಗೂ ಅಪಘಾತಕ್ಕೊಳಗಾದವರು ಸಂಕಷ್ಟ ಅನುಭವಿಸುತ್ತಿದ್ದಾರೆ. ರಕ್ತದಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಅರಿವು ಮೂಡಿಸುವ ಅಗತ್ಯವಿದ್ದು, ರಕ್ತದಾನದಿಂದಾಗುವ ಪ್ರಯೋಜನಗಳ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಅವರನ್ನು ಈ ಮಾನವೀಯ ಕಾರ್ಯದಲ್ಲಿ ಭಾಗಿಯಾಗುವಂತೆ ಪ್ರೇರೇಪಿಸಬೇಕು ಎಂದು ಎಸ್ಪಿ ತಿಳಿಸಿದರು.

ರಕ್ತದಾನದಿಂದ ಕೆಲವೇ ದಿನಗಳಲ್ಲಿ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಆರೋಗ್ಯದ ಮೇಲೂ ಸಕಾರಾತ್ಮಕ ಪರಿಣಾಮ ಬೀರುವುದರಿಂದ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ, ಹೆಚ್ಚು ಹೆಚ್ಚು ಜನರು ರಕ್ತದಾನ ಮಾಡಲು ಮುಂದಾಗುವಂತೆ ಶಿಬಿರಗಳನ್ನು ಆಯೋಜಿಸಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರ ಬಾಬು ಮಾತನಾಡಿ, ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ ಹಾಗೂ ಅದನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ ಎಂದರು. ಆರೋಗ್ಯವಂತ ವ್ಯಕ್ತಿಯೊಬ್ಬರು ನಿಯಮಿತವಾಗಿ ರಕ್ತದಾನ ಮಾಡಿದರೆ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್ಸಿಎಚ್ಒ ಡಾ. ನಂದಿತಾ ಎಂ.ಎನ್., ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಮಹಮ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ್, ರಿಮ್ಸ್ ಬೋಧಕ ಆಸ್ಪತ್ರೆಯ ಪ್ರಾಂಶುಪಾಲ ಡಾ. ರಾಹುಲ್ ಕೀರ್ತಿ, ನವೋದಯ ಕಾಲೇಜಿನ ಪ್ರಾಂಶುಪಾಲ ಡಾ. ಗುರುದತ್ತ ಪವಾರ್, ಎಎಂಇ ಕಾಲೇಜಿನ ದಂತ ವಿಭಾಗದ ಮುಖ್ಯಸ್ಥ ಡಾ. ಸೋಮನಾಥ ರೆಡ್ಡಿ, ಡಾ. ಅರುಣಾ ಕುಮಾರಿ, ಎಫ್ಡಬ್ಲ್ಯುಒ ಡಾ. ಶಿವಕುಮಾರ್ ನಾರಾ, ಡಾ. ಜಹೀರ್, ಮಹಿಳಾ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಡಾ. ಸಂತೋಷ್, ಡಿಎಚ್ಇಒ ಈಶ್ವರ ಹೆಚ್. ದಾಸಪ್ಪನವರ, ಡಿವೈಎಚ್ಇಒ ಬಸಯ್ಯ, ಡ್ಯಾಪ್ಕೋ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ಸಿಪಿಒ ಬಸವರಾಜಪ್ಪಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಘೋಷಣೆಗಳೊಂದಿಗೆ ಜಾಗೃತಿ ಜಾಥಾ ನಡೆಸಿ ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.













