ರಾಯಚೂರು, ಮಾರ್ಚ್ 31:
ಭಗವಾನ್ ಮಹಾವೀರರು ಬೋಧಿಸಿದ ಶಾಂತಿ, ಸೌಹಾರ್ಧತೆ ಹಾಗೂ ಸಹೋದರತೆ ಸಂದೇಶಗಳು ಇಂದಿನ ಸಮಾಜದಲ್ಲೂ ಅತ್ಯಂತ ಪ್ರಸ್ತುತವಾಗಿವೆ ಎಂದು ರಾಯಚೂರು ಸಹಾಯಕ ಆಯುಕ್ತರಾದ ಡಾ. ಹಂಪಣ್ಣ ಸಜ್ಜನ್ ತಿಳಿಸಿದ್ದಾರೆ. ನಗರದ ಸುಮತಿನಾಥ ಜೈನ ಶ್ವೇತಾಂಬರ ಮೂರ್ತಿ ಪೂಜಕ ಆರಾಧನಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಾವೀರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಾವೀರರು ಪ್ರತಿಪಾದಿಸಿದ ಅಹಿಂಸಾ ತತ್ವವು ಮಾನವಕುಲಕ್ಕೆ ದಾರಿದೀಪವಾಗಿದ್ದು, ಮಹನೀಯರ ಜಯಂತಿಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಸ್ವಾಮಿ ಮಾತನಾಡಿ, ಕರುಣೆ, ಅಹಿಂಸೆ ಮತ್ತು ಸಮಾನತೆ ಎಂಬ ಮಹಾವೀರರ ಬೋಧನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. “ನಾವು ಬದುಕಬೇಕು, ಇತರರನ್ನು ಬದುಕಲು ಬಿಡಬೇಕು” ಎಂಬ ಸಂದೇಶವನ್ನು ಪಾಲಿಸುವುದು ಅತ್ಯಂತ ಅಗತ್ಯವೆಂದು ಹೇಳಿದರು. ಮಹಾವೀರರ ಉಪದೇಶಗಳು ಜೈನ ಧರ್ಮಕ್ಕೆ ಮಾತ್ರ ಸೀಮಿತವಲ್ಲದೆ, ಇಡೀ ಮನುಕುಲದ ಕಲ್ಯಾಣಕ್ಕೆ ಮಾರ್ಗದರ್ಶಕವಾಗಿವೆ ಎಂದರು.

ಉಪನ್ಯಾಸಕರಾಗಿ ಮಾತನಾಡಿದ ಪ್ರೇಮಲತಾ ಅವರು, ಮಹಾವೀರರು ಜಗತ್ತಿನ ಅನೇಕ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಮಹಾನ್ ವ್ಯಕ್ತಿಯಾಗಿದ್ದು, ತಮ್ಮ ಜೀವನವನ್ನೇ ಮಾನವಕಲ್ಯಾಣಕ್ಕೆ ಮುಡುಪಾಗಿಟ್ಟಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಕ್ರಾಂತಿಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಭಗವಾನ್ ಮಹಾವೀರರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಜೈನ್ ಭವನದಿಂದ ಆರಂಭವಾದ ಮೆರವಣಿಗೆಯಲ್ಲಿ ನೂರಾರು ಜನರು ಪಾಲ್ಗೊಂಡು ಶಾಂತಿ, ಸಹಿಷ್ಣುತೆ ಹಾಗೂ ಅಹಿಂಸೆಯ ಸಂದೇಶವನ್ನು ಸಾರಿದರು.



ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ತಹಶೀಲ್ದಾರ್ ಸುರೇಶ್ ವರ್ಮ, ಮಹಾನಗರ ಪಾಲಿಕೆ ಸಮಿತಿ ಕಾರ್ಯದರ್ಶಿ ಕೃಷ್ಣಾ ಶಾವಂತಗೇರಾ ಸೇರಿದಂತೆ ಹಲವಾರು ಅಧಿಕಾರಿಗಳು ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು. ದಂಡಪ್ಪ ಬಿರಾದಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಶೋಕ ಕುಮಾರ್ ಜೈನ್ ವಂದಿಸಿದರು.










