
ಮೇ 07. ಕೊಪ್ಪಳ BB NEWS KANNADA
ಗಂಗಾವತಿ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಡೊನೇಷನ್ ಹಾವಳಿ ತಡೆಗಟ್ಟಲು ಹಾಗೂ ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ’ ರಚಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಗಂಗಾವತಿ ತಾಲೂಕು ಸಮಿತಿಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ, ರಾಜ್ಯದ ಅನೇಕ ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರ್ಟಿಇ ಕಾಯ್ದೆಯನ್ನು ಉಲ್ಲಂಘಿಸಿ ದಾಖಲಾತಿ ಹೆಸರಿನಲ್ಲಿ ಡೊನೇಷನ್ ವಸೂಲಿ ಮಾಡುತ್ತಿವೆ ಎಂದು ಆರೋಪಿಸಿದರು. ಬಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದು ಕಷ್ಟಕರವಾಗುತ್ತಿದೆ ಎಂದು ಹೇಳಿದರು.

ಖಾಸಗಿ ಶಾಲೆಗಳು ಅನಧಿಕೃತವಾಗಿ ಪ್ರವೇಶ ಪರೀಕ್ಷೆ ನಡೆಸುವುದು, JEE, NEET, CET ತರಬೇತಿ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದು, ಶಾಲಾ ಸಾಮಗ್ರಿಗಳನ್ನು ಕಡ್ಡಾಯವಾಗಿ ಖರೀದಿಸಲು ಒತ್ತಾಯಿಸುವ ಮೂಲಕ ಪಾಲಕರ ಮೇಲೆ ಆರ್ಥಿಕ ಭಾರ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ತಾಲೂಕ ಅಧ್ಯಕ್ಷ ನಾಗರಾಜ್ ಯು ಮಾತನಾಡಿ, ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ ಆವರಣದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅನಧಿಕೃತ ಟ್ಯೂಷನ್ ಸೆಂಟರ್ಗಳನ್ನು ತಕ್ಷಣ ಮುಚ್ಚಬೇಕು ಎಂದು ಒತ್ತಾಯಿಸಿದರು.

ಪ್ರಮುಖ ಹಕ್ಕೊತ್ತಾಯಗಳು:
ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರವನ್ನು ತಕ್ಷಣ ರಚಿಸಬೇಕು.
ಡೊನೇಷನ್ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರ ನೇತೃತ್ವದಲ್ಲಿ ಪಾಲಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಸಭೆ ಕರೆಯಬೇಕು.
ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲೆಗಳ ಮುಂದೆ ಕಡ್ಡಾಯವಾಗಿ ಪ್ರದರ್ಶಿಸಬೇಕು.
ನಿಯಮ ಮೀರಿ ಪ್ರವೇಶ ಪರೀಕ್ಷೆ ನಡೆಸುವ ಹಾಗೂ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ದಂಡ ವಿಧಿಸಬೇಕು.
ಅನಧಿಕೃತ ಟ್ಯೂಷನ್ ಸೆಂಟರ್ ಹಾಗೂ ಖಾಸಗಿ ಶಾಲೆಗಳನ್ನು ನಿಯಂತ್ರಿಸಬೇಕು.
ಮನವಿಗೆ ಸ್ಪಂದಿಸಿದ ಬಿಇಒ ಅಧಿಕಾರಿ ನಟೇಶ್ ಅವರು, ಡೊನೇಷನ್ ವಸೂಲಿ ಹಾಗೂ ಫೀ ವಿವರಗಳ ಫ್ಲೆಕ್ಸ್ ಪ್ರದರ್ಶಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ತಾಲೂಕ ಅಧ್ಯಕ್ಷ ನಾಗರಾಜ್ ಯು, ಬಾಳಪ್ಪ ಹುಲಿಹೈದರ್, ಬಸಯ್ಯ, ಶರಣಬಸವ ಬಾದ್ನಟ್ಟಿ, ದೊಡ್ಡಬಸವ, ಯಂಕಣ್ಣ, ಅಲ್ತಾಫ್, ಕಾರ್ತಿಕ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.










