ಸಿಂಧನೂರು ವಸತಿ ನಿಲಯಗಳ ಆಹಾರ ಅವ್ಯವಸ್ಥೆ ಪ್ರಕರಣ: ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ಪರಿಶೀಲನೆ
ಸಿಂಧನೂರು, ಆ.6: ಸಿಂಧನೂರಿನ ಒಳಬಳ್ಳಾರಿ ರಸ್ತೆಯಲ್ಲಿರುವ ಮುರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಕಳಪೆ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಗಂಭೀರ ಸ್ವರೂಪ ಪಡೆದಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ 3ನೇ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಸೋಮಶೇಖರ್ ಅವರು ಗುರುವಾರ ಎರಡೂ ವಸತಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚೆಗೆ ಮುರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಊಟದ ಅವ್ಯವಸ್ಥೆಯಿಂದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆ ಬಳಿಕ ಸ್ಥಳೀಯ ಶಾಸಕರಾದ ಹಂಪನಗೌಡ ಬಾದರ್ಲಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಮೂಲಸೌಕರ್ಯ ಮತ್ತು ಶೈಕ್ಷಣಿಕ ವ್ಯವಸ್ಥೆ ಪರಿಶೀಲಿಸಿ, ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಆದರೆ, ಕೆಲವೇ ದಿನಗಳಲ್ಲಿ ಡಾ. ಅಂಬೇಡ್ಕರ್ ವಸತಿ ನಿಲಯದಲ್ಲಿಯೂ ಕಳಪೆ ಆಹಾರದಿಂದ ಹತ್ತಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಘಟನೆ ನಡೆದಾಗಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರೂ, ಸಮಸ್ಯೆ ಮರುಕಳಿಸಿರುವುದು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪರಿಶೀಲನೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾ ನ್ಯಾಯಾಧೀಶ ಸೋಮಶೇಖರ್ ಅವರು, "ಕರ್ನಾಟಕ ಉಚ್ಚ ನ್ಯಾಯಾಲಯದ ಬಾಲ ನ್ಯಾಯಾಲಯ ಸಮಿತಿಯಿಂದ ಈ ಹಾಸ್ಟೆಲ್ಗಳಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚನೆ ಬಂದಿತ್ತು. 55ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಪರಿಶೀಲಿಸಲು ನೇರವಾಗಿ ಬಂದಿದ್ದೇವೆ" ಎಂದು ತಿಳಿಸಿದರು.

"ವಸತಿ ನಿಲಯದ ಅಡುಗೆ ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅನ್ನದ ಪಾತ್ರೆಯಲ್ಲಿದ್ದ ಆಹಾರ ಅತ್ಯಂತ ಕಳಪೆ ಸ್ಥಿತಿಯಲ್ಲಿ ಕಂಡುಬಂತು. ಅದು ಮನುಷ್ಯರು ಸೇವಿಸಲು ಯೋಗ್ಯವಾಗಿರಲಿಲ್ಲ. ಇಷ್ಟೊಂದು ಘಟನೆಗಳ ನಂತರವೂ ಇದೇ ಪರಿಸ್ಥಿತಿ ಮುಂದುವರಿದಿರುವುದು ಅತ್ಯಂತ ಬೇಸರದ ಸಂಗತಿ," ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಘಟನೆಗೆ ಸಂಬಂಧಿಸಿದಂತೆ ವಸತಿ ನಿಲಯದ ನಿಲಯಪಾಲಕ ಹಾಗೂ ಅಡುಗೆ ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಮಾಹಿತಿ ನೀಡಲಾಗಿದ್ದು, "ಕೇವಲ ಅಮಾನತು ಮಾಡುವುದು ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ. ಅದಾದ ನಂತರ ವಿದ್ಯಾರ್ಥಿಗಳಿಗೆ ಉತ್ತಮ ಆಹಾರ ಮತ್ತು ಸಮರ್ಪಕ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯನ್ನೂ ಅಧಿಕಾರಿಗಳು ನಿರ್ವಹಿಸಬೇಕಿತ್ತು," ಎಂದು ಅವರು ಹೇಳಿದರು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಮತ್ತೊಮ್ಮೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

"ಈ ವಸತಿ ನಿಲಯಗಳಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಇದೇ ರೀತಿಯ ಆಹಾರ ಮತ್ತು ಅವ್ಯವಸ್ಥೆ ಮುಂದುವರಿದರೆ ಕೇವಲ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಮಾತ್ರವಲ್ಲ, ಅವರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ. ಇದು ಖಂಡನೀಯ ಮತ್ತು ಕ್ಷಮಿಸಲಾಗದ ನಿರ್ಲಕ್ಷ್ಯ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಶಾಶ್ವತ ಪರಿಹಾರ ಕೈಗೊಳ್ಳಬೇಕು. ಅಗತ್ಯವಿದ್ದರೆ ನಾವು ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ," ಎಂದು ನ್ಯಾಯಾಧೀಶರು ಎಚ್ಚರಿಕೆ ನೀಡಿದರು. ಸತತವಾಗಿ ಒಂದೇ ರೀತಿಯ ಘಟನೆಗಳು ಮರುಕಳಿಸುತ್ತಿರುವುದು ವಸತಿ ನಿಲಯಗಳ ಆಡಳಿತ ವ್ಯವಸ್ಥೆ, ಆಹಾರದ ಗುಣಮಟ್ಟ ಹಾಗೂ ಮೇಲ್ವಿಚಾರಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.













